ಶಿವಲಿಂಗಕ್ಕೆ ಅರ್ಧ ಪ್ರದಕ್ಷಿಣೆ ಹಾಕುವುದರಲ್ಲಿನ ಧರ್ಮಶಾಸ್ತ್ರ !

ಶಿವನಿಗೆ ಹಾಕುವ ಪ್ರದಕ್ಷಿಣೆಯು ಅರ್ಧಚಂದ್ರನಂತೆ, ಅಂದರೆ ಸೋಮಸೂತ್ರಿ ಯಾಗಿರುತ್ತದೆ. ಪಾಣಿಪೀಠದಿಂದ ಉತ್ತರ ದಿಕ್ಕಿನ ಕಡೆಗೆ ಮಂದಿರದ ವಿಸ್ತಾರದ ಕೊನೆಯ ವರೆಗೆ (ಪ್ರಾಂಗಣದ ವರೆಗೆ) ಹೋಗುವ ಹರಿನಾಳಕ್ಕೆ ಸೋಮಸೂತ್ರವೆನ್ನುತ್ತಾರೆ. ಶಿವಲಿಂಗದ ಎದುರು ನಿಂತಾಗ ಬಲಬದಿಗೆ ಅಭಿಷೇಕದ ನೀರು ಹೋಗುವ ಹರಿನಾಳವಿರುತ್ತದೆ. ಪ್ರದಕ್ಷಿಣೆಯ ಮಾರ್ಗವು ಚಿತ್ರದಲ್ಲಿ ತೋರಿಸಿದಂತೆ ಸಂ. ೧ ರಿಂದ ಆರಂಭವಾಗುತ್ತದೆ. ಪ್ರದಕ್ಷಿಣೆ ಹಾಕುವಾಗ (ಶಿವಲಿಂಗದ ಎದುರಿನಿಂದ ಆರಂಭಿಸಿ) ತಮ್ಮ ಎಡಬದಿಯಿಂದ ಹರಿನಾಳದ ಇನ್ನೊಂದು ಬದಿಯವರೆಗೆ ಹೋಗಬೇಕು.

ನಂತರ ಹರಿನಾಳವನ್ನು ದಾಟದೇ ಹಿಂತಿರುಗಿ ಸಂ.೭ ರ ವರೆಗೆ ಬಂದು ಪ್ರದಕ್ಷಿಣೆ ಪೂರ್ಣಗೊಳಿಸಬೇಕು. ಈ ನಿಯಮವು ಶಿವಲಿಂಗವು ಮಾನವಸ್ಥಾಪಿತ ಅಥವಾ ಮಾನವನಿರ್ಮಿತವಾಗಿದ್ದರೆ ಮಾತ್ರ ಅನ್ವಯಿಸುತ್ತದೆ. ಈ ನಿಯಮವು ಸ್ವಯಂಭೂ ಲಿಂಗಕ್ಕೆ ಮತ್ತು ಚಲಲಿಂಗಕ್ಕೆ (ಮನೆಯಲ್ಲಿರುವ ಲಿಂಗಕ್ಕೆ) ಅನ್ವಯಿಸುವುದಿಲ್ಲ. ಪಾಣಿಪೀಠದಿಂದ ಹರಿದು ಹೋಗುವ (ಹರಿನಾಳದ) ನೀರಿನಲ್ಲಿ ಶಕ್ತಿಯ ಪ್ರವಾಹವಿರುವುದರಿಂದ ಅದನ್ನು ದಾಟಬಾರದು. ಅದನ್ನು ದಾಟುವಾಗ ಕಾಲುಗಳು ಅಗಲವಾಗುವುದರಿಂದ ವೀರ್ಯ ನಿರ್ಮಿತಿಯ ಮೇಲೆ ಹಾಗೂ ೫ ವಾಯುಗಳ ಮೇಲೆ ವಿಪರೀತ ಪರಿಣಾಮವಾಗುತ್ತದೆ. ದೇವದತ್ತ ಮತ್ತು ಧನಂಜಯ ವಾಯುಗಳು ಕುಗ್ಗುತ್ತವೆ. ಆದರೆ ಅದನ್ನು ದಾಟುವಾಗ ವ್ಯಕ್ತಿಯು ತನ್ನನ್ನು ತಾನು ಬಿಗಿಹಿಡಿದುಕೊಂಡರೆ ನರಗಳು ಬಿಗಿಯಾಗಿ ಅದರ ಪರಿಣಾಮವಾಗುವುದಿಲ್ಲ. ಬುದ್ಧಿಪ್ರಾಮಾಣ್ಯವಾದಿಗಳಿಗೆ, ಹರಿನಾಳವನ್ನು ದಾಟುವಾಗ ಕಾಲಿನ  ಕೊಳೆಯು ಅದರಲ್ಲಿ ಬಿದ್ದರೆ, ಆ ನೀರನ್ನು ತೀರ್ಥವೆಂದು ಸೇವಿಸುವ ಭಕ್ತರಿಗೆ ರೋಗ ಬರುತ್ತದೆಯೆಂದು ಅದನ್ನು ದಾಟುವುದಿಲ್ಲವೆಂದು ಅನಿಸುತ್ತದೆ !