ಚೆನ್ನೈನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ : ಉದ್ರಿಕ್ತ ಗುಂಪಿನ ಹಲ್ಲೆಗೆ ವ್ಯಕ್ತಿ ಬಲಿ !

ಚೆನ್ನೈ (ತಮಿಳುನಾಡು) – ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪೊಂದು ನಡೆಸಿದ ಅಮಾನವೀಯ ಹಲ್ಲೆಯಿಂದಾಗಿ ೩೦ ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಕಲೈಸೆಲ್ವನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ (ಫೂಟೇಜ್) ಸಹಾಯದಿಂದ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.

ಮಾರ್ಚ್ ೧೧ ರಂದು ಈ ಘಟನೆ ನಡೆದಿದ್ದು, ಕಲೈಸೆಲ್ವನ್ ಮದ್ಯದ ಅಮಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿದ್ದನು. ಅದೇ ಸಮಯದಲ್ಲಿ ಮಹಿಳೆಯೊಬ್ಬರು ತಮ್ಮ ಸ್ನೇಹಿತನೊಂದಿಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಆಗ ಕಲೈಸೆಲ್ವನ್ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ. ಈ ಕೃತ್ಯದಿಂದ ಆಕ್ರೋಶಗೊಂಡ ಮಹಿಳೆ ಮತ್ತು ಆಕೆಯ ಸ್ನೇಹಿತ ಕಲೈಸೆಲ್ವನ್‌ ನನ್ನು ತರಾಟೆಗೆ ತೆಗೆದುಕೊಂಡಾಗ ಅವರ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಗುಂಪಿನಲ್ಲಿದ್ದ ಕೆಲವರು ಕಲೈಸೆಲ್ವನ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅಲ್ಲಿದ್ದ ಜನರು ಕೂಡಲೇ ಆತನನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ದರಾದರೂ, ಆತ ಅದಾಗಲೇ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ಘೋಷಿಸಿದರು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.