ಲಂಚಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಯ ಒತ್ತಡ: ಪೊಲೀಸ್ ಪೇದೆಯಿಂದ ದಯಾಮರಣಕ್ಕೆ ಆಗ್ರಹ!

ಪೊಲೀಸ್ ಇಲಾಖೆಯ ಭ್ರಷ್ಟಾಚಾರವನ್ನು ಬಯಲು ಮಾಡಿದ ಘಟನೆ!

ವಿಜಯಪುರ – ತನ್ನ ಹಿರಿಯ ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತ ಪೊಲೀಸ್ ಪೇದೆಯೊಬ್ಬರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿದ್ದಾರೆ. ಈ ಪತ್ರವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಯುವ ಸಾಧ್ಯತೆಯಿದೆ.

ಈ ಪತ್ರದಲ್ಲಿ ಪೇದೆಯು , “ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟಾ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿಸಿಕೊಳ್ಳಲು, ಆದರ್ಶನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ (PSI) ಸೀತಾರಾಮ್ ಲಮಾಣಿ ಅವರು ಲಂಚ ನೀಡುವಂತೆ ನನ್ನ ಮೇಲೆ ಸತತವಾಗಿ ಒತ್ತಡ ಹೇರುತ್ತಿದ್ದಾರೆ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಪ್ರತಿಯೊಂದು ವಿಷಯದಲ್ಲೂ ಹಣದ ಬೇಡಿಕೆ ಇಡುತ್ತಾರೆ ಮತ್ತು ಹಣ ನೀಡದಿದ್ದರೆ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಪೀಡಿಸುತ್ತಾರೆ. ಅವರ ಈ ವರ್ತನೆಯಿಂದಾಗಿ ನನಗೆ ಶಾಂತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮ ನನ್ನ ಕುಟುಂಬದ ಮೇಲೆಯೂ ಬೀರಿದೆ” ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸಂಪಾದಕೀಯ ನಿಲುವು

ಈ ಘಟನೆಯು ಪೊಲೀಸ್ ಇಲಾಖೆಯ ಆಡಳಿತ ಹೇಗೆ ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ಸ್ವತಃ ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಇಂತಹ ಪೊಲೀಸರು ಸಮಾಜದಲ್ಲಿನ ಅಪರಾಧಗಳನ್ನು ನಿಯಂತ್ರಿಸುತ್ತಾರೋ ಅಥವಾ ಹೆಚ್ಚಿಸುತ್ತಾರೋ?