ಜನರಿಗೆ ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ; ಆದರೆ ಜನರಿಗೆ ತೊಂದರೆ ಆಗಬಾರದು ! – ಸರ್ವೋಚ್ಚ ನ್ಯಾಯಾಲಯ

ನವ ದೆಹಲಿ – ದೇಶದ ಎಲ್ಲಾ ಜನರಿಗೆ ಶಾಂತಿಯುತ ಮತ್ತು ಕಾನೂನುಬದ್ಧ ಮಾರ್ಗದಲ್ಲಿ ಪ್ರತಿಭಟನೆ ನಡೆಸುವ ಹಕ್ಕಿದೆ; ಆದರೆ ರಸ್ತೆಗಿಳಿದು ಸಾಮಾನ್ಯ ಜನರಿಗೆ ತೊಂದರೆ ಉಂಟುಮಾಡುವಂತಿಲ್ಲ. ಪ್ರತಿಭಟನೆಯ ಹೆಸರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಲು ಅಥವಾ ಭಯದ ವಾತಾವರಣವನ್ನು ನಿರ್ಮಿಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನವಿ ಮುಂಬಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಾಮಕರಣದ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದರು.

ಅರ್ಜಿಯಲ್ಲಿ, ವಿಮಾನ ನಿಲ್ದಾಣದ ಹೆಸರಿನ ವಿಚಾರವಾಗಿ ಪ್ರತಿಭಟನೆ ನಡೆಸಿದ ಯುವಕರ ಮೇಲೆ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ವಾದಿಸಲಾಗಿದೆ. ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಮಧ್ಯಪ್ರವೇಶಿಸಲು ನಿರಾಕರಿಸಿತು. ನ್ಯಾಯಾಲಯವು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ತಮ್ಮ ಬೇಡಿಕೆಗಳನ್ನು ಮಂಡಿಸಲು ಮತ್ತು ಸೂಕ್ತ ವೇದಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಹಕ್ಕಿದೆ ಎಂದು ಹೇಳಿತು. ಒಂದು ವೇಳೆ ಸರಕಾರವು ತಕ್ಷಣವೇ ಸ್ಪಂದಿಸದಿದ್ದರೆ, ಜನರು ನಿರಂತರವಾಗಿ ಬೇಡಿಕೆಗಳನ್ನು ಮಂಡಿಸುತ್ತಲೇ ಇರುವುದು ಅಗತ್ಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂತಿಮವಾಗಿ ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಯಾವುದಾದರೊಂದು ವಿಷಯದ ಕುರಿತು ನಿರ್ಧಾರ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂಬುದು ಅರ್ಥವಾಗುತ್ತದೆ