ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!

  • ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!

  • ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ: ತಕ್ಷಣವೇ ಕ್ರಮಕ್ಕೆ ಡಿಜಿಪಿ ಸೂಚನೆ

ಪೋಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸುತ್ತಿರುವ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಸದಸ್ಯರು

ಬೆಂಗಳೂರು – ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಎಲ್ಲ ಪ್ರಕರಣಗಳಲ್ಲಿ ಯಾವುದೇ ತಾರತಮ್ಯವಿಲ್ಲದೆ ಕಾನೂನನ್ನು ಸಮಾನವಾಗಿ ಅನ್ವಯಿಸಬೇಕು ಹಾಗೂ ದಾಖಲಾಗಿರುವ ಪ್ರಕರಣಗಳಲ್ಲಿ ತ್ವರಿತ ಮತ್ತು ನಿಷ್ಪಕ್ಷಪಾತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಿಗೆ (DGP & IGP) ಮಾನ್ಯ ಸಲೀಂ ಅವರಿಗೆ ಮನವಿ ಸಲ್ಲಿಸಲಾಯಿತು. ಸಮಿತಿಯ ಮನವಿಯಲ್ಲಿ, ದಿನಾಂಕ 09-06-2026ರಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಕೆ. ಎಸ್. ಭಗವಾನ್ ಅವರು ಭಗವಾನ್ ಶ್ರೀರಾಮ ಹಾಗೂ ಹಿಂದೂ ಧರ್ಮದ ಆರಾಧ್ಯ ದೇವತೆಗಳ ಕುರಿತು ನೀಡಿರುವ ಹೇಳಿಕೆಗಳಿಂದ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದರೂ ಇದುವರೆಗೆ ಪರಿಣಾಮಕಾರಿ ಕಾನೂನು ಕ್ರಮ ಜರುಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಅದೇ ರೀತಿ, ಆರ್ಯವರ್ದನ ಗುರುಜಿಯವರು ಶ್ರೀ ಮಹಾಲಕ್ಷ್ಮೀ ದೇವಿಯ ಕುರಿತು ನೀಡಿದ ಹೇಳಿಕೆಗಳ ಸಂಬಂಧ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಮಿತಿ ಗಮನ ಸೆಳೆದಿದೆ.

ಇನ್ನೊಂದೆಡೆ, ಮತ್ತೊಂದು ಪ್ರಕರಣದಲ್ಲಿ ದೂರು ದಾಖಲಾದ ಕೂಡಲೇ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿದ ಸಮಿತಿಯು, ಎಲ್ಲ ಪ್ರಕರಣಗಳಲ್ಲಿಯೂ ಭಾರತ ಸಂವಿಧಾನದ ಅನುಚ್ಛೇದ 14ರ ಆಶಯಕ್ಕೆ ಅನುಗುಣವಾಗಿ ಕಾನೂನಿನ ಮುಂದೆ ಸಮಾನತೆ ಮತ್ತು ಕಾನೂನಿನ ಸಮಾನ ರಕ್ಷಣೆ ಖಚಿತಪಡಿಸಬೇಕು ಎಂದು ಒತ್ತಾಯಿಸಿದೆ. ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರು ತಕ್ಷಣವೇ ಸಂಬಂಧಿಸಿದ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ, ಪ್ರೊ. ಕೆ. ಎಸ್. ಭಗವಾನ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ತನಿಖೆಯನ್ನು ತ್ವರಿತಗೊಳಿಸಿ, ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಅದೇ ರೀತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ದೂರವಾಣಿ ಮೂಲಕ ಸೂಚನೆ ನೀಡಿ, ಆರ್ಯವರ್ದನ ಗುರುಜಿಯವರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಕಾನೂನುಬದ್ಧವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಡಿಜಿಪಿಯವರ ತ್ವರಿತ ಸ್ಪಂದನೆಯನ್ನು ಸ್ವಾಗತಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಎಲ್ಲ ಪ್ರಕರಣಗಳಲ್ಲಿಯೂ ಯಾವುದೇ ತಾರತಮ್ಯ, ವಿಳಂಬ ಅಥವಾ ಪಕ್ಷಪಾತವಿಲ್ಲದೆ ಏಕರೂಪದ, ಪಾರದರ್ಶಕ ಹಾಗೂ ನಿಷ್ಪಕ್ಷಪಾತ ಕಾನೂನು ಕ್ರಮ ಜರುಗಬೇಕು ಎಂದು ಆಗ್ರಹಿಸಿದೆ. ಈ ನಿಯೋಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ ಮೋಹನ ಗೌಡ, ಶ್ರೀರಾಮ ಸೇನೆಯ ಶ್ರೀನಿವಾಸ ಗುರುಜಿ, ಮಲ್ಲಿಕಾರ್ಜುನ ರಾಜು, ಅಡ್ವೊಕೇಟ್ ಗಂಗಾಧರ, ರಾಘವೇಂದ್ರ, ಮೋಹನ್ ಸೇರಿದಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.