೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ

ಮಂಗಳೂರು – ಇಡೀ ರಾಜ್ಯವನ್ನೇ ನಡುಗಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ದೊಡ್ಡ ಯಶಸ್ಸು ಸಿಕ್ಕಿದೆ. ಸುಮಾರು ೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾದ್ (೩೨ ವರ್ಷ) ಮತ್ತು ಅಬ್ದುಲ್ ನಾಸಿರ್ (೪೧ ವರ್ಷ) ಎಂದು ಗುರುತಿಸಲಾಗಿದೆ. ಕೇರಳ ಮತ್ತು ತಮಿಳುನಾಡಿನ ರಹಸ್ಯ ಅಡಗುದಾಣಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಇವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

೨೬ ಜುಲೈ ೨೦೨೨ ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರು ತಮ್ಮ ಅಂಗಡಿಯನ್ನು ಮುಚ್ಚಿ ಮನೆಗೆ ಹಿಂದಿರುಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ಹಂತಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಅವರನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದರು. ಇವರಿಬ್ಬರ ಬಂಧನದಿಂದಾಗಿ ಈ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದ ಆರೋಪಿಗಳ ಸಂಖ್ಯೆ ೨೩ಕ್ಕೆ ಏರಿಕೆಯಾಗಿದೆ. ಇನ್ನೂ ೫ ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.