ಅಸ್ಸಾಂ: ನೆರೆಗೆ ೪೧ ಜನರ ಸಾವು !

೯೦೦ ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತ !

ಗೌಹಾಟಿ (ಅಸ್ಸಾಂ): ಅಸ್ಸಾಂನಲ್ಲಿ ಸುರಿಯುತ್ತಿರುವ  ಮಳೆಯಿಂದಾಗಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಬ್ರಹ್ಮಪುತ್ರ ನದಿ ಮತ್ತು ಅದರ ಉಪನದಿಗಳ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ರಾಜ್ಯದ ೨೫ ಜಿಲ್ಲೆಗಳ ೯೦೦ ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತಗೊಂಡಿವೆ. ರಾಜ್ಯದ ಹಲವು ಭಾಗಗಳಲ್ಲಿ ರಸ್ತೆ ಮತ್ತು ರೈಲು ಸಂಚಾರ ಸ್ಥಗಿತಗೊಂಡಿದೆ. ಈ ಪ್ರವಾಹದಿಂದಾಗಿ ೪೧ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜುಲೈ ೨೨ ರ ಸಂಜೆಯ ವೇಳೆಗೆ ೯೯೦ ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಈ ಕಷ್ಟದ ಸಮಯದಲ್ಲಿ ರಾಜ್ಯ ಸರಕಾರ, ಸೇನಾಪಡೆ, ‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ’ (NDRF) ಮತ್ತು ‘ರಾಜ್ಯ ವಿಪತ್ತು ನಿರ್ವಹಣಾ ಪಡೆ’ (SDRF) ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಭಾರತೀಯ ಸೇನೆಯು ‘ಆಪರೇಷನ್ ಜಲ ರಾಹತ್’ ಅಡಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮಾತನಾಡಿ, “ಸಂತ್ರಸ್ತರಿಗೆ ನೆರವು ಮತ್ತು ರಕ್ಷಣಾ ಕಾರ್ಯಾಚರಣೆ ಸರಕಾರದ ಅತ್ಯುನ್ನತ ಆದ್ಯತೆಯಾಗಿದೆ” ಎಂದು ತಿಳಿಸಿದ್ದಾರೆ. ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ತಲಾ ೪ ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.